
ಡ್ರಂಕ್ & ಡ್ರೈವ್ ಪ್ರಕರಣದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ದಂಡದ ಹಣವನ್ನು ನ್ಯಾಯಾಲಯಕ್ಕೆ ಜಮಾ ಮಾಡದೇ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿಹಾಗೂ ಹೆಡ್ ಕಾನ್ಸ್ಟೆಬಲ್ ಇಬ್ಬರನ್ನೂ ಅಮಾನತು ಮಾಡಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಗಳ ಅನುಮೋದನೆಯೊಂದಿಗೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಲಭ್ಯ ಮಾಹಿತಿಯಂತೆ, ಕೆಲ ದಿನಗಳ ಹಿಂದೆ ಡ್ರಂಕ್ & ಡ್ರೈವ್ ಪ್ರಕರಣವೊಂದರಲ್ಲಿ ಆರೋಪಿಯಿಂದ ರೂ.15,000 ದಂಡದ ಮೊತ್ತವನ್ನು ಸ್ವೀಕರಿಸಲಾಗಿತ್ತು. ಈ ಹಣವನ್ನು ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಜಮಾ ಮಾಡಬೇಕಾಗಿದ್ದರೂ, ಅದನ್ನು ಪಾವತಿಸದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಇಟ್ಟುಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಅಕ್ರಮಕ್ಕೆ ಸಂಬಂಧಿಸಿ ಜುಲೈ ತಿಂಗಳಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಾಥಮಿಕ ತನಿಖೆಗೆ ಸೂಚನೆ ನೀಡಿದ್ದರು. ತನಿಖೆ ವೇಳೆ ಸಿಪಿಐ ವಿರುದ್ಧದ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದ್ದು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಲಾಗಿದೆ.
ಇದೇ ಪ್ರಕರಣದಲ್ಲಿ ಸಿಪಿಐಗೆ ಸಹಕಾರ ನೀಡಿದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನೂ ಅಮಾನತು ಮಾಡಲಾಗಿದೆ. ಅಲ್ಲದೇ, ದೂರು ದಾಖಲಿಸದಂತೆ ಸಾರ್ವಜನಿಕರನ್ನು ಬೆದರಿಸಿದ್ದಾರೆಯೆಂಬ ಆರೋಪವೂ ಹೆಡ್ ಕಾನ್ಸ್ಟೆಬಲ್ ವಿರುದ್ಧ ಕೇಳಿಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ವಿರುದ್ಧ ಈ ಹಿಂದೆ ಕೂಡ ಸ್ಥಳೀಯ ಮಟ್ಟದಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಅಧಿಕಾರಿಗಳಿಂದ ಎಚ್ಚರಿಕೆ ನೀಡಿದರೂ ವರ್ತನೆ ಸುಧಾರಿಸಿಕೊಳ್ಳದ ಹಿನ್ನೆಲೆ ಇದೀಗ ಅಮಾನತು ಕ್ರಮಕ್ಕೆ ಕಾರಣವಾಗಿದೆ ಎನ್ನಲಾಗಿದೆ.ಪ್ರಕರಣದ ಕುರಿತ ತನಿಖೆ ಮುಂದುವರಿದಿದೆ.
